ಕಳಸ ಲೈವ್ ವರದಿ
ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಗ್ರಾಮೀಣ ಜನರ ಆರೋಗ್ಯ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ಶಿಬಿರದಲ್ಲಿ ಪಾಲ್ಗೊಂದು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯ ಸದಾನಂದ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಳಸ ವತಿಯಿಂದ ಭಾನುವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಬಿಪಿ, ಶುಗರ್, ಹೃದ್ರೋಗ ಮುಂತಾದ ಕಾಯಿಲೆಗಳು ಸಾಮಾನ್ಯವಾಗಿವೆ. ಇಂತಹ ರೋಗಗಳು ತಗುಲಿಕೊಂಡರೆ ಬಡ ಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಆರೋಗ್ಯದಲ್ಲಿ ಮುಂದೆ ಬರಬಹುದಾದ ಸವಾಲುಗಳಿಗೆ ಇಂದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಇಂತಹ ಶಿಬಿರ ಸಹಕಾರಿಯಾಗಲಿದೆ. ಗ್ರಾಮೀಣ ಭಾಗದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದರು.
ಸುಮಾರು 150ಕ್ಕೂ ಹೆಚ್ಚು ಜನರು ರಕ್ತದೊತ್ತಡ, ಸಕ್ಕರೆ ಕಾಯಿಲೆ, ಇ.ಸಿ.ಜಿ, ಸ್ತನ ಕ್ಯಾನ್ಸರ್, ರಕ್ತದ ಗುಂಪು ಪರೀಕ್ಷೆಯನ್ನು ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಕಳಸ ಸಮುದಾಯ ಕೇಂದ್ರ ವೈದ್ಯಾಧಿಕಾರಿ ಡಾ.ಶಿವಸಾಯಿ ರೆಡ್ಡಿ, ಡಾ.ರವಿತೇಜ, ಡಾ.ನಿಕಿತ್, ಯೋಜನಾಧಿಕಾರಿ ಸುರೇಶ್, ಯೋಜನೆಯ ಮೇಲ್ವಿಚಾರಕ ಹರೀಶ್, ಸಮನ್ವಯ ಅಧಿಕಾರಿ ಚೈತ್ರ, ಒಕ್ಕೂಟದ ಪದಾಧಿಕಾರಿಗಳು ಇದ್ದರು.